ಬೆಂಗಳೂರು, ಜುಲೈ 7: ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ 20 ವರ್ಷದ ವಿದ್ಯಾರ್ಥಿನಿ ತೇಜು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ನಡೆದಿದೆ. ಯುವತಿಯ ಶವವು ಇಂದು (ಜುಲೈ 7) ಬೆಳಗಿನ ಜಾವ ಸ್ಯಾಂಕಿ ಕೆರೆಯಲ್ಲಿ ಪತ್ತೆಯಾಗಿದೆ. ಸದಾಶಿವನಗರ ಪೊಲೀಸರು ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ತೇಜು ತನ್ನ ಪ್ರಿಯಕರನಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂದೇಶ ಕಳುಹಿಸಿ, ನಂತರ ತನ್ನ ಮೊಬೈಲ್ ಫೋನ್ ಅನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ತೇಜು ಪೋಷಕರು ವಿಚ್ಛೇದನ ಪಡೆದಿದ್ದು, ತಾಯಿ ಮೆಟ್ರೋದಲ್ಲಿ ಕೆಲಸ ಮಾಡುತ್ತಾರೆ. ಆಕೆ ಚಿಕ್ಕಬಾಣಾವರ ಸಮೀಪದ ಕಾಲೇಜಿನಲ್ಲಿ ಪದವಿ ಅಧ್ಯಯನ ಮಾಡುತ್ತಿದ್ದರು.
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ತೇಜು ಅವರ ಕುಟುಂಬಸ್ಥರಿಂದ ಮತ್ತು ಪ್ರಿಯಕರನಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಸೋಕೋ (SOCO) ತಂಡವನ್ನು ಕರೆಸಲಾಗಿದ್ದು, ಇದು ಆತ್ಮಹತ್ಯೆಯೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬುದರ ಕುರಿತು ಸಾಕ್ಷ್ಯಗಳನ್ನು ಕಲೆಹಾಕಲಾಗುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ