ಭಾರತೀಯ ಚಿತ್ರರಂಗದ ಅತ್ಯಂತ ದುಬಾರಿ ಪ್ರಾಜೆಕ್ಟ್ ಆದ ‘ರಾಮಾಯಣ’ ಸಿನಿಮಾ ಭಾರಿ ಕುತೂಹಲ ಮೂಡಿಸಿದೆ. ಈ ಬಹುನಿರೀಕ್ಷಿತ ಸಿನಿಮಾದ ಟ್ರೇಲರ್ ಜುಲೈ 18 ರಂದು ಬಿಡುಗಡೆಯಾಗಲಿದೆ ಎಂದು ಈಗಾಗಲೇ ವರದಿಯಾಗಿದೆ. ಈಗ ಈ ಟ್ರೇಲರ್ ಲಾಂಚ್ ಕಾರ್ಯಕ್ರಮ ಎಲ್ಲಿ ನಡೆಯಲಿದೆ ಎನ್ನುವ ಬಿಗ್ ಅಪ್ಡೇಟ್ ಸಿಕ್ಕಿದೆ. ರಣಬೀರ್ ಕಪೂರ್ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರದ ಟ್ರೇಲರ್ ಲಾಂಚ್ ದೆಹಲಿಯಲ್ಲಿ ನಡೆಯಲಿದೆ. ದೆಹಲಿಯ ಐತಿಹಾಸಿಕ ಮತ್ತು ಪ್ರತಿಷ್ಠಿತ ತಾಣವಾದ ‘ಭಾರತ್ ಮಂಟಪ’ದಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಲು ಚಿತ್ರತಂಡ ನಿರ್ಧರಿಸಿದೆ ಎಂದು ‘ವೆರೈಟಿ’ ನಿಯತಕಾಲಿಕೆ ವರದಿ ಮಾಡಿದೆ.
ದೊಡ್ಡ ಮಟ್ಟದ ಆಯೋಜನೆ:
ರಾಮಾಯಣವನ್ನು ಮಹಾಕಾವ್ಯ ಎಂದು ಪರಿಗಣಿಸಲಾಗಿದೆ. ಈ ಕಥೆಯನ್ನು ಎರಡು ಭಾಗಗಳಾಗಿ ತೆರೆಗೆ ತರಲಾಗುತ್ತಿದೆ. ಚಿತ್ರದ ಮೌಲ್ಯ ಮತ್ತು ಪ್ರಾಮುಖ್ಯತೆಗೆ ತಕ್ಕಂತೆ ಟ್ರೇಲರ್ ಲಾಂಚ್ ಕಾರ್ಯಕ್ರಮವನ್ನು ಅತ್ಯಂತ ಭವ್ಯವಾಗಿ ನಡೆಸಲು ಸಿದ್ಧತೆ ನಡೆದಿದೆ. ಕಾರ್ಯಕ್ರಮದಲ್ಲಿ ಚಿತ್ರದ ನಿರ್ದೇಶಕ ನಿತೇಶ್ ತಿವಾರಿ ಮತ್ತು ನಿರ್ಮಾಪಕ ನಮಿತ್ ಮಲ್ಹೋತ್ರಾ ಭಾಗವಹಿಸಲಿದ್ದಾರೆ. ಅವರೊಂದಿಗೆ ಚಿತ್ರದ ಪ್ರಮುಖ ತಾರಾಗಣ ಕೂಡ ಉಪಸ್ಥಿತರಿರಲಿದೆ ಎಂದು ವರದಿ ಆಗಿದೆ.
ದೊಡ್ಡ ತಾರಾಗಣ ಹೊಂದಿರುವ ಸಿನಿಮಾ:
ಈ ಚಿತ್ರದಲ್ಲಿ ಸಾಯಿ ಪಲ್ಲವಿ, ರಾಕಿಂಗ್ ಸ್ಟಾರ್ ಯಶ್, ಸನ್ನಿ ಡಿಯೋಲ್, ರವಿ ದುಬೆ, ರಾಕುಲ್ ಪ್ರೀತ್ ಸಿಂಗ್, ಕಾಜಲ್ ಅಗರ್ವಾಲ್ ಮತ್ತು ಕುನಾಲ್ ಕಪೂರ್ ನಟಿಸಿದ್ದಾರೆ. ಸಿನಿಮಾಗೆ ಹ್ಯಾನ್ಸ್ ಜಿಮ್ಮರ್ ಮತ್ತು ಎ.ಆರ್. ರೆಹಮಾನ್ ಜಂಟಿಯಾಗಿ ಸಂಗೀತ ನೀಡುತ್ತಿದ್ದಾರೆ.
ಇದನ್ನೂ ಓದಿ: ಜುಲೈ 18ರಂದೇ ಬಿಡುಗಡೆ ಆಗುತ್ತಾ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಟ್ರೇಲರ್?
ಧರ್ಮ ಪ್ರೊಡಕ್ಷನ್ಸ್ ಸಂಸ್ಥೆಯು ಈ ಚಿತ್ರವನ್ನು ಭಾರತದಾದ್ಯಂತ ಬಿಡುಗಡೆ ಮಾಡುತ್ತಿದೆ. ಈ ದೃಶ್ಯ ವೈಭವದ ಸಿನಿಮಾ 2026ರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಚಿತ್ರಮಂದಿರಗಳಲ್ಲಿ ಜಾಗತಿಕವಾಗಿ ತೆರೆಗೆ ಬರಲಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ದೀಪಾವಳಿಗೆ ತೆರೆಗೆ ಬರುತ್ತಿದೆ ಎಂಬುದು ವಿಶೇಷ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.