
ಬೆಂಗಳೂರು, ಜುಲೈ 16: ‘‘ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ ಕೆಲಸ ನಡೆಯುತ್ತಿದೆ. ಈಗಾಗಲೇ 50% ಪರಿಷ್ಕರಣೆ ಮಾಡಲಾಗಿದೆ’’ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘‘ಸ್ಮಾರ್ಟ್ ಪಿಡಿಎಸ್ ಸುಧಾರಣೆಗಳ ಭಾಗವಾಗಿ, ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಪಾಸ್ ಯಂತ್ರಗಳು ಮತ್ತು ಎಲೆಕ್ಟ್ರಾನಿಕ್ ತೂಕದ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಇದು ಗ್ರಾಹಕರಿಗೆ ತೂಕದಲ್ಲಿ ಆಗುತ್ತಿದ್ದ ಸಮಸ್ಯೆಗಳನ್ನು ನಿವಾರಿಸಲಿದೆ. ಜೊತೆಗೆ, ವಿತರಣಾ ವಾಹನಗಳಿಗೆ ಜಿಪಿಎಸ್ ಅಳವಡಿಸಿ, ಅವುಗಳ ಚಲನವಲನವನ್ನು ಪತ್ತೆಹಚ್ಚಲು ಬೆಂಗಳೂರಿನಲ್ಲಿ ಕಮಾಂಡ್ ಸೆಂಟರ್ ಸ್ಥಾಪಿಸಲಾಗುತ್ತಿದೆ. ಇದು ಕಮಿಷನರ್ ಕಚೇರಿ ಮತ್ತು ಫುಡ್ ಕಾರ್ಪೊರೇಷನ್ ಎಂಡಿ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸಲಿದ್ದು, ಪಡಿತರ ಬಡವರಿಗೆ ಸರಿಯಾಗಿ ತಲುಪುವುದನ್ನು ಖಚಿತಪಡಿಸುತ್ತದೆ’’ ಎಂದು ತಿಳಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.