ನವದೆಹಲಿ, ಜುಲೈ 23: ದೇಶಾದ್ಯಂತ ಕಾವೇರಿರುವ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಯುವಜನರ ಭಾರಿ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಕೊನೆಗೂ ತಮ್ಮ ಮೌನ ಮುರಿದಿದ್ದಾರೆ. ಪರೀಕ್ಷಾ ಅಕ್ರಮ ಎಸಗಿದ ಅಪರಾಧಿಗಳಿಗೆ ತಕ್ಷಣವೇ ಕಠಿಣ ಶಿಕ್ಷೆ ಖಚಿತಪಡಿಸಲು ‘ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು’ ಸ್ಥಾಪಿಸುವುದಾಗಿ ಪ್ರಧಾನಿ ಮೋದಿ ಪ್ರಮುಖ ಘೋಷಣೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ, ದೇಶದ ಯುವಜನತೆಯ ಭವಿಷ್ಯ ಮತ್ತು ಕಲ್ಯಾಣಕ್ಕಿಂತ ಸರ್ಕಾರಕ್ಕೆ ಬೇರೆ ಯಾವುದೂ ಮುಖ್ಯವಲ್ಲ ಎಂದು ಪ್ರತಿಪಾದಿಸಿದ್ದಾರೆ.
“ನಮ್ಮ ಯುವಕರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ನಮಗೆ ಬೇರೇನೂ ಮುಖ್ಯವಲ್ಲ, ಪ್ರಶ್ನೆಪತ್ರಿಕೆ ಸೋರಿಕೆ ದಂಧೆಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರಿಗೂ ತ್ವರಿತ ಹಾಗೂ ಕಠಿಣ ಶಿಕ್ಷೆಯಾಗುವುದನ್ನು ಖಚಿತಪಡಿಸಲು ನಾವು ಫಾಸ್ಟ್ ಟ್ರ್ಯಾಕ್ ಕೋರ್ಟ್ಗಳನ್ನು ಸ್ಥಾಪಿಸಲು ನಿರ್ಧರಿಸಿದ್ದೇವೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುವ ಯಾರನ್ನೂ ಸರ್ಕಾರ ಬಿಡುವುದಿಲ್ಲ.” ಎಂದಿದ್ದಾರೆ.
ಪ್ರಧಾನಿ ನೀಡಿದ ಮುಖ್ಯ ಭರವಸೆಗಳು
ತ್ವರಿತ ವಿಚಾರಣೆ: ನೀಟ್ ಸೇರಿದಂತೆ ಎಲ್ಲಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಸಾಮಾನ್ಯ ನ್ಯಾಯಾಲಯಗಳಲ್ಲಿ ವಿಳಂಬ ಮಾಡದೇ, ಫಾಸ್ಟ್ ಟ್ರ್ಯಾಕ್ ಕೋರ್ಟ್ಗಳ ಮೂಲಕವೇ ಶೀಘ್ರವಾಗಿ ವಿಚಾರಣೆ ನಡೆಸಿ ಅಪರಾಧಿಗಳಿಗೆ ಜೈಲು ಶಿಕ್ಷೆ ವಿಧಿಸಲಾಗುವುದು.
ವಿದ್ಯಾರ್ಥಿಗಳ ಹಿತರಕ್ಷಣೆ: ಪರೀಕ್ಷಾ ಪಾರದರ್ಶಕತೆ ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡಲು ಸರ್ಕಾರ ನಿರಂತರವಾಗಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದು, ಇದು ಆ ಸರಣಿ ಸುಧಾರಣೆಗಳ ಪ್ರಮುಖ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.
ಮತ್ತಷ್ಟು ಓದಿ: ಜಂತರ್ ಮಂತರ್ನಲ್ಲಿ ಮತ್ತೆ ಭುಗಿಲೆದ್ದ ಗಲಭೆ; ಪ್ರತಿಭಟನೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ, ಎಸಿಪಿಗಳಿಗೆ ಗಾಯ
ದೆಹಲಿಯ ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಸೇರಿದಂತೆ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪ್ರಸಿದ್ಧ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಕಳೆದ ಒಂದು ತಿಂಗಳಿನಿಂದ ನಿರಂತರ ಉಪವಾಸ ಸತ್ಯಾಗ್ರಹ ಮತ್ತು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರಧಾನಿ ನಿವಾಸದ ಹೊರಗೆ ಧರಣಿ ನಡೆಸಿದ್ದರು. ಶಿಕ್ಷಣ ಸಚಿವರು ವಿಪಕ್ಷಗಳು ವಿದ್ಯಾರ್ಥಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದ್ದರು.
ಮೋದಿ ಪೋಸ್ಟ್
Nothing is more important than the welfare and future of our youth!
We have decided to set up fast-track courts to ensure swift and stringent punishment for those involved in paper leaks. Have directed the concerned authorities and officials to take all necessary steps in this…
— Narendra Modi (@narendramodi) July 23, 2026
ಪ್ರತಿಭಟನಾಕಾರರ ಮೇಲಿನ ಪೋಲಿಸ್ ಕ್ರಮದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ತಳ್ಳಿಹಾಕಿದ್ದವು. ಈ ಬೆನ್ನಲ್ಲೇ, ವಿದ್ಯಾರ್ಥಿಗಳ ಆಕ್ರೋಶ ತಣ್ಣಗಾಗಿಸಲು ಮತ್ತು ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿಷಯವನ್ನು ಹತೋಟಿಗೆ ತರಲು ಪ್ರಧಾನಿ ಮೋದಿ ಈ ಫಾಸ್ಟ್ ಟ್ರ್ಯಾಕ್ ಕೋರ್ಟ್ ಅಸ್ತ್ರವನ್ನು ಬಳಸಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On – 9:31 am, Thu, 23 July 26