ಬೆಳಗಾವಿ, ಜುಲೈ 27: ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಗಾಂಜಾ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಲ್ಲಿ ನಾಲ್ವರು ಯೂಟ್ಯೂಬರ್ಗಳನ್ನು ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಕಾರು, ಮೊಬೈಲ್ ಫೋನ್ಗಳು ಹಾಗೂ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಕಲ್ಲಪ್ಪ ಮಾಳಾಜ್, ಮಲ್ಲಿಕಾರ್ಜುನ ಜುಲಫಿ, ಪೃಥ್ವಿರಾಜ್ ಚವ್ಹಾಣ ಹಾಗೂ ಡೇವಿಡ್ ತಂಗೇರಾಳ ಎಂದು ಗುರುತಿಸಲಾಗಿದೆ. ಈ ಕುರಿತು ಕೊಟಬಾಗಿ ಗ್ರಾಮದ ಮೆಹಬೂಬ್ ಜಮಾದಾರ್ ನೀಡಿದ ದೂರಿನ ಆಧಾರದ ಮೇಲೆ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಏನಿದು ಪ್ರಕರಣ?
ದೂರಿನ ಪ್ರಕಾರ, ಆರೋಪಿಗಳು ಮೆಹಬೂಬ್ ಜಮಾದಾರ್ ಅವರಿಗೆ ಮೊದಲು ಗಾಂಜಾ ಪ್ಯಾಕೆಟ್ ನೀಡಿದ್ದು, ಬಳಿಕ ಪೊಲೀಸರ ಹೆಸರಿನಲ್ಲಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ‘ನೀವು ಗಾಂಜಾ ಮಾರಾಟ ಮಾಡುತ್ತಿದ್ದೀರಿ, ನಿಮ್ಮ ವಿರುದ್ಧ ಪ್ರಕರಣ ದಾಖಲಿಸುತ್ತೇವೆ’ ಎಂದು ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದೇ ವೇಳೆ, ಗಾಂಜಾ ನೀಡಿದ ದೃಶ್ಯಗಳನ್ನು ತಾವೇ ವಿಡಿಯೊ ಚಿತ್ರೀಕರಿಸಿಕೊಂಡು, ಅದನ್ನು ಆಧಾರವನ್ನಾಗಿ ಮಾಡಿಕೊಂಡು 3 ಲಕ್ಷ ರೂ. ಹಣ ನೀಡುವಂತೆ ಬ್ಲ್ಯಾಕ್ಮೇಲ್ ಮಾಡಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಳಿಕ ಮೆಹಬೂಬ್ ಅವರಿಂದ 60 ಸಾವಿರ ರೂ. ಹಣವನ್ನು ಪಡೆದಿದ್ದಾರೆ ಎನ್ನಲಾಗಿದೆ.
ಹಣ ನೀಡದ ಬಳಿಕ ವಿಡಿಯೊ ಅಪ್ಲೋಡ್ ಆರೋಪ
ದೂರುದಾರರು ಹೆಚ್ಚಿನ ಹಣ ನೀಡಲು ನಿರಾಕರಿಸಿದ ನಂತರ, ಆರೋಪಿಗಳು ಚಿತ್ರೀಕರಿಸಿದ್ದ ವಿಡಿಯೊವನ್ನು ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಅಪ್ಲೋಡ್ ಮಾಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮೆಹಬೂಬ್ ಜಮಾದಾರ್ ಅವರು ಹುಕ್ಕೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ಮೊಬೈಲ್ ವಾಪಸ್ ನೀಡಿಲ್ಲವೆಂದು ದೇವಸ್ಥಾನದಲ್ಲೇ ಗೆಳೆಯನ ಕೊಲೆ! ಆರೋಪಿ ಅರೆಸ್ಟ್
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಳಿಯಿದ್ದ ಕಾರು, ಮೊಬೈಲ್ ಫೋನ್ಗಳು ಹಾಗೂ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ