ನವದೆಹಲಿ, ಜುಲೈ 29: ವಿದ್ಯಾರ್ಥಿ ಚಳವಳಿಯಲ್ಲಿದ್ದ ಮೇಲೆ ಬಂಧನ ಎದುರಿಸಲು ಸಿದ್ಧರಿರಬೇಕು ಎಂದು ಪ್ರತಿಭಟನಾಕಾರರ ಮೇಲೆ ಪೊಲೀಸ್ ಕ್ರಮವನ್ನು ಕೇಂದ್ರ ಸಚಿವ ಜೆಪಿ ನಡ್ಡಾ(JP Nadda) ಸಮರ್ಥಿಸಿಕೊಂಡಿದ್ದಾರೆ. ಸಂಸತ್ತಿನ ರಾಜ್ಯಸಭೆಯಲ್ಲಿ ಬುಧವಾರ ವಿಪಕ್ಷಗಳು ಮತ್ತು ಆಡಳಿತಾರೂಢ ಎನ್ಡಿಎ ನಾಯಕರ ನಡುವೆ ತೀವ್ರ ವಾಕ್ಸಮರ ನಡೆಯಿತು. ದೆಹಲಿಯ ಜಂತರ್ ಮಂತರ್ ಮತ್ತು ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಸಿಜೆಪಿ (CJP) ನೇತೃತ್ವದ ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಬಲಪ್ರಯೋಗವನ್ನು ಸಮರ್ಥಿಸಿಕೊಂಡ ಜೆಪಿ ನಡ್ಡಾ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಪೊಲೀಸರ ಪ್ರಾಥಮಿಕ ಕರ್ತವ್ಯ. ಪ್ರತಿಭಟನೆ ಹಾಗೂ ಚಳವಳಿಗಳಲ್ಲಿ ಭಾಗವಹಿಸುವವರು ಪೊಲೀಸ್ ಕ್ರಮಗಳನ್ನು ಎದುರಿಸಲು ಸಿದ್ಧರಿರಬೇಕು ಎಂದು ಖಡಕ್ ಆಗಿ ಹೇಳಿದ್ದಾರೆ.
ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಈ ವಿಷಯವನ್ನು ಪ್ರಸ್ತಾಪಿಸಿ, ಬಿಜೆಪಿ ಆಡಳಿತದಲ್ಲಿ ಪ್ರಜಾಪ್ರಭುತ್ವವೂ ಸುರಕ್ಷಿತವಾಗಿಲ್ಲ, ಸಾಮಾನ್ಯ ಜನರೂ ಸುರಕ್ಷಿತವಾಗಿಲ್ಲ. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಯುವಜನರ ಮೇಲೆ ಕ್ರೂರ ಬಲಪ್ರಯೋಗ ನಡೆಸಿದ ಅಧಿಕಾರಿಗಳು ಮತ್ತು ಅಪರಾಧಿಗಳು ನಿರಾತಂಕವಾಗಿ ಓಡಾಡುತ್ತಿದ್ದಾರೆ ಎಂದು ಆರೋಪಿಸಿದರು.
ಖರ್ಗೆ ಅವರಿಗೆ ಉತ್ತರಿಸಿದ ಜೆ.ಪಿ. ನಡ್ಡಾ, ಸಾರ್ವಜನಿಕ ಆಸ್ತಿಗೆ ಧಕ್ಕೆ ಉಂಟಾಗದಂತೆ ಮತ್ತು ಕಾನೂನು ಸುವ್ಯವಸ್ಥೆ ಹದಗೆಡದಂತೆ ತಡೆಯಲು ಪೊಲೀಸರು ಸಾಮಾನ್ಯ ಕ್ರಮ ಕೈಗೊಂಡಿದ್ದಾರೆ. ಪ್ರತಿಯೊಂದು ಪೊಲೀಸ್ ಕ್ರಮವನ್ನೂ ರಾಜಕೀಯಗೊಳಿಸುವುದು ಸರಿಯಲ್ಲ. ನಾನು ಕೂಡ ತುರ್ತು ಪರಿಸ್ಥಿತಿಯ ಅವಧಿಯಲ್ಲಿ ಕಾಂಗ್ರೆಸ್ ಆಡಳಿತದ ವೇಳೆ ವಿದ್ಯಾರ್ಥಿ ನಾಯಕನಾಗಿದ್ದಾಗ ತರಗತಿಯಿಂದಲೇ ಎರಡು ಬಾರಿ ಬಂಧನಕ್ಕೊಳಗಾಗಿದ್ದೆ ಎಂದು ತಮ್ಮ ವಿದ್ಯಾರ್ಥಿ ಜೀವನದ ಉದಾಹರಣೆ ನೀಡಿದರು.
ಮತ್ತಷ್ಟು ಓದಿ: ಪ್ರತಿಭಟನಾಕಾರರು ಮಾತುಕತೆಗೆ ನನ್ನ ಮನೆ, ಕಚೇರಿಗೆ ಬರಬಹುದು; ಕೇಂದ್ರ ಸಚಿವ ಜೆ.ಪಿ. ನಡ್ಡಾ
ಜಂತರ್ ಮಂತರ್ ಪ್ರತಿಭಟನೆಯ ಪ್ರಮುಖ ಮುಖಗಳಲ್ಲಿ ಒಬ್ಬರಾದ ಜೆಎನ್ಯು ಮಾಜಿ ವಿದ್ಯಾರ್ಥಿ ನಾಯಕಿ ಹಾಗೂ ಎಸ್ಎಫ್ಐ ನಾಯಕಿ ಐಷೆ ಘೋಷ್ ಅವರನ್ನು ಬಂಧಿಸಲು ದೆಹಲಿ ಪೊಲೀಸರು ದೆಹಲಿಯ ಸಿಪಿಐ(ಎಂ) (CPI-M) ಕೇಂದ್ರ ಕಚೇರಿಗೆ ನಿಯಮ ಮೀರಿ ನುಗ್ಗಿದ್ದಾರೆ ಎಂದು ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ವಿರೋಧ ಪಕ್ಷಗಳು ದೆಹಲಿ ಪೊಲೀಸರ ನಡೆ ಮತ್ತು ಪ್ರತಿಭಟನಾಕಾರರ ಮೇಲಿನ ದೌರ್ಜನ್ಯದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಅಧಿಕೃತ ನಿಲುವು ಸ್ಪಷ್ಟಪಡಿಸಬೇಕು ಹಾಗೂ ಪ್ರಧಾನಿ ಮೋದಿ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದವು. ಮಂಗಳವಾರ ಲೋಕಸಭೆಯಲ್ಲಿ ಮಾತನಾಡಿದ್ದ ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್, ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯವು ದೇಶದಲ್ಲಿ 1975 ರ ತುರ್ತು ಪರಿಸ್ಥಿತಿಗಿಂತಲೂ ಭೀಕರವಾಗಿದೆ ಎಂದು ಬಣ್ಣಿಸಿದ್ದರು.
ಜುಲೈ 20 ರಂದು ಸಿಜೆಪಿ ನೇತೃತ್ವದಲ್ಲಿ ಸಾವಿರಾರು ವಿದ್ಯಾರ್ಥಿಗಳು ಜಂತರ್ ಮಂತರ್ನಿಂದ ಸಂಸತ್ತಿನತ್ತ ಮೆರವಣಿಗೆ ಹೊರಟಾಗ ಪೊಲೀಸರು ತಡೆಗೋಡೆ ನಿರ್ಮಿಸಿ ಲಘು ಲಾಠಿಪ್ರಹಾರ ಹಾಗೂ ಅಶ್ರುವಾಯು ಪ್ರಯೋಗಿಸಿದ್ದರು. ಈ ವೇಳೆ ನಡೆದಿರುವ ಘರ್ಷಣೆಯಲ್ಲಿ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 118 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು
ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದು, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಪ್ರತಿಭಟನಾಕಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಕಠಿಣ ಕಾನೂನು ತರಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ