ಬೆಂಗಳೂರು, ಆಗಸ್ಟ್ 18: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮನೆ-ಮನೆ ಭೇಟಿ ಕಾರ್ಯ ಸೋಮವಾರ (ಆಗಸ್ಟ್ 17) ಮುಕ್ತಾಯಗೊಂಡಿದೆ. ಜೂನ್ 30ರಿಂದ ಆರಂಭವಾಗಿದ್ದ ಈ ಪ್ರಕ್ರಿಯೆಯಲ್ಲಿ ರಾಜ್ಯಾದ್ಯಂತ ಒಟ್ಟು 5,54,32,314 ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಈ ಪೈಕಿ 4,46,00,369 ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. SIR ಪ್ರಕ್ರಿಯೆಯಲ್ಲಿ ಒಟ್ಟು 1,08,31,945 ASDDO ಮತದಾರರು ಪತ್ತೆಯಾಗಿದ್ದಾರೆ. ಇವರ ಪೈಕಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಬೇಕಾದ ಸಾಧ್ಯತೆ ಇರುವವರ ವಿವರಗಳನ್ನು ಪರಿಶೀಲಿಸಲಾಗುತ್ತಿದೆ.
ಎಸ್ಡಿಡಿಒ ಮತದಾರರು ಎಂದರೆ ಯಾರು?
ASDDO ಎಂದರೆ Absent, Shifted, Dead, Duplicate and Others ಎಂಬ ವರ್ಗಗಳನ್ನು ಒಳಗೊಂಡಿದೆ. ಅಂದರೆ ಗೈರುಹಾಜರಾಗಿರುವವರು, ಸ್ಥಳಾಂತರಗೊಂಡವರು, ಮೃತಪಟ್ಟವರು, ನಕಲಿ ಅಥವಾ ಡುಪ್ಲಿಕೇಟ್ ಹೆಸರುಗಳು ಹಾಗೂ ಇತರೆ ಕಾರಣಗಳಿಂದ ಪರಿಶೀಲನೆ ಅಗತ್ಯವಿರುವ ಮತದಾರರು ಈ ವರ್ಗಕ್ಕೆ ಸೇರುತ್ತಾರೆ.
7 ಲಕ್ಷ ನಕಲಿ ಮತದಾರರು!
ಲಭ್ಯವಿರುವ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ 15,28,985 ಮತದಾರರು ನಾಪತ್ತೆಯಾಗಿರುವುದು, 65,61,607 ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿರುವುದು ಪತ್ತೆಯಾಗಿದೆ. ಇದೇ ವೇಳೆ 16,38,839 ಮತದಾರರು ಮೃತಪಟ್ಟಿರುವುದು, 7,07,792 ನಕಲಿ ಮತದಾರರು ಹಾಗೂ 3,94,722 ಇತರೆ ವರ್ಗದ ಮತದಾರರು ಪತ್ತೆಯಾಗಿದ್ದಾರೆ.
ಈ ಅಂಕಿ-ಅಂಶಗಳ ಆಧಾರದಲ್ಲಿ ಸುಮಾರು 1.08 ಕೋಟಿ ಮತದಾರರ ಹೆಸರುಗಳು ಮೊದಲ ಕರಡು ಮತದಾರರ ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ ಇದೆ. ಆದರೆ ಅಂತಿಮವಾಗಿ ಯಾರ ಹೆಸರು ಮತದಾರರ ಪಟ್ಟಿಯಲ್ಲಿ ಉಳಿಯಲಿದೆ ಅಥವಾ ಕೈಬಿಡಲಾಗುತ್ತದೆ ಎಂಬುದು ಮುಂದಿನ ಪರಿಶೀಲನೆ ಮತ್ತು ಆಕ್ಷೇಪಣೆಗಳ ಪ್ರಕ್ರಿಯೆಯ ಬಳಿಕ ಸ್ಪಷ್ಟವಾಗಲಿದೆ.
ಆಗಸ್ಟ್ 24ಕ್ಕೆ ಮೊದಲ ಕರಡು ಪಟ್ಟಿ
SIR ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 24ರಂದು ಪ್ರಕಟಿಸಲು ನಿಗದಿಪಡಿಸಲಾಗಿದೆ. ಕರಡು ಪಟ್ಟಿಯಲ್ಲಿ ಹೆಸರು ಇಲ್ಲದಿರುವುದು ಅಥವಾ ಯಾವುದೇ ವಿವರಗಳಲ್ಲಿ ತಪ್ಪು ಕಂಡುಬಂದರೆ, ಮತದಾರರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ.
ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಆಕ್ಷೇಪಣೆ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಅವಕಾಶ ಇರಲಿದೆ. ಈ ಅವಧಿಯಲ್ಲಿ ಸಲ್ಲಿಕೆಯಾಗುವ ಆಕ್ಷೇಪಣೆಗಳು ಮತ್ತು ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅಂತಿಮ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.
ಅಕ್ಟೋಬರ್ 27ಕ್ಕೆ ಅಂತಿಮ ಪಟ್ಟಿ
ಪರಿಶೀಲನೆ, ಆಕ್ಷೇಪಣೆ ಮತ್ತು ತಿದ್ದುಪಡಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ. ಹೀಗಾಗಿ ಮೊದಲ ಕರಡು ಪಟ್ಟಿಯಲ್ಲಿ ಹೆಸರು ಕಾಣಿಸದ ಮತದಾರರು ಆತಂಕಪಡುವ ಅಗತ್ಯವಿಲ್ಲ. ನಿಗದಿತ ಅವಧಿಯಲ್ಲಿ ತಮ್ಮ ಹಕ್ಕು ಪ್ರತಿಪಾದಿಸಲು ಅವಕಾಶವಿದೆ.
ಇದನ್ನೂ ಓದಿ: ಕರ್ನಾಟಕ SIR: ರಾಜ್ಯದ ASDDO ಮತದಾರರ ಪೈಕಿ ಅರ್ಧದಷ್ಟು ಬೆಂಗಳೂರಿನಲ್ಲೇ!
SIR ಪ್ರಕ್ರಿಯೆಯ ಪ್ರಮುಖ ಉದ್ದೇಶ ಮತದಾರರ ಪಟ್ಟಿಯನ್ನು ಪರಿಶುದ್ಧಗೊಳಿಸುವುದು ಮತ್ತು ಅರ್ಹ ಮತದಾರರ ಹೆಸರುಗಳನ್ನು ಖಚಿತಪಡಿಸುವುದಾಗಿದೆ. ಈ ಹಿನ್ನೆಲೆಯಲ್ಲಿ ನಾಪತ್ತೆ, ಸ್ಥಳಾಂತರ, ಮರಣ ಅಥವಾ ನಕಲಿ ಹೆಸರುಗಳಂತಹ ದಾಖಲೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.
ವರದಿ: ಅರುಣ್ ಕುಮಾರ್, ಟಿವಿ9 ಬೆಂಗಳೂರು
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ