ಮಂಡ್ಯ, ಆಗಸ್ಟ್ 19: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ತಮಿಳುನಾಡಿಗೆ ನೀರು ಬಿಡುಗಡೆ ಮಾಡಿಲ್ಲ ಎಂದು ಹೇಳುತ್ತಿದ್ದರೂ, ವಾಸ್ತವ ಪರಿಸ್ಥಿತಿ ಇದಕ್ಕೆ ವಿರುದ್ಧವಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬರುತ್ತಿವೆ. ಕೆಆರ್ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಸ್ಥಗಿತಗೊಳಿಸಿ, ನದಿಗೆ ಮಾತ್ರವೇ ಸುಮಾರು 2,300 ಕ್ಯೂಸೆಕ್ಸ್ ನೀರನ್ನು ಹರಿಸಲಾಗುತ್ತಿದೆ.
ರಾಜ್ಯದಲ್ಲಿ ಬರಗಾಲದ ಸ್ಥಿತಿ ಇರುವುದರಿಂದ ಮತ್ತು ಕಾವೇರಿ ಕೊಳ್ಳದ ಜಲಾಶಯಗಳು ಪೂರ್ಣವಾಗಿ ಭರ್ತಿಯಾಗದ ಕಾರಣ ತಮಿಳುನಾಡಿಗೆ ನೀರು ಬಿಡಲಾಗುವುದಿಲ್ಲ ಎಂದು ಸರ್ಕಾರ ಪದೇ ಪದೇ ಹೇಳುತ್ತಾ ಬಂದಿದೆ. ಆದರೆ, ಪ್ರತ್ಯಕ್ಷ ದೃಶ್ಯಗಳ ಪ್ರಕಾರ, ಕೆಆರ್ಎಸ್ ಮತ್ತು ಕಬಿನಿ ಜಲಾಶಯಗಳಿಂದ ತಮಿಳುನಾಡಿಗೆ ದೊಡ್ಡ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದು ಸ್ಪಷ್ಟವಾಗಿದೆ. ಕಬಿನಿ ಜಲಾಶಯದಿಂದ 12,000 ಕ್ಯೂಸೆಕ್ಸ್ ನೀರು ಬಿಡಲಾಗುತ್ತಿದ್ದು, ಕೆಆರ್ಎಸ್ ನಿಂದ 2,000 ಕ್ಯೂಸೆಕ್ಸ್ಗಿಂತಲೂ ಹೆಚ್ಚು ನೀರು ಹರಿದು ಹೋಗುತ್ತಿದೆ.
ಈ ಮೂಲಕ ರಾಜ್ಯ ಸರ್ಕಾರ ರೈತರನ್ನು ದಿಕ್ಕು ತಪ್ಪಿಸುತ್ತಿದೆ ಮತ್ತು ಕದ್ದುಮುಚ್ಚಿ ತಮಿಳುನಾಡಿಗೆ ನೀರು ಬಿಡುತ್ತಿದೆ ಎಂಬ ಆರೋಪಗಳು ಬಲವಾಗಿ ಕೇಳಿಬರುತ್ತಿವೆ. ಸುಪ್ರೀಂ ಕೋರ್ಟ್ ಅಥವಾ CWMA ಆದೇಶಗಳನ್ನು ಪಾಲಿಸುವುದಿಲ್ಲ ಎಂದು ಹೇಳಿದರೂ ಸಹ, ವಾಸ್ತವದಲ್ಲಿ ನೀರು ಹರಿಯುತ್ತಿರುವುದು ವಿವಾದಕ್ಕೆ ಕಾರಣವಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
