ನವದೆಹಲಿ, ಮಾರ್ಚ್ 05: ಇರಾನ್(Iran) ಮೇಲೆ ದಾಳಿ ನಡೆಸಲು ಅಮೆರಿಕವು ಭಾರತದ ಬಂದರು(Port)ಗಳನ್ನು ಬಳಸುತ್ತಿದೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದರೆ ಈ ವರದಿಯನ್ನು ಭಾರತ ತಿರಸ್ಕರಿಸಿದೆ. ಅಮೆರಿಕ ಮೂಲದ ಒನ್ ಅಮೇರಿಕ ನ್ಯೂಸ್ ನೆಟ್ವರ್ಕ್ಗೆ ನೀಡಿದ ಸಂದರ್ಶನದಲ್ಲಿ ಅಮೆರಿಕದ ಮಾಜಿ ಸೇನಾ ಕರ್ನಲ್ ಡೌಗ್ಲಾಸ್ ಮ್ಯಾಕ್ಗ್ರೆಗರ್, ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕ ಭಾರತೀಯ ನೌಕಾ ನೆಲೆಗಳನ್ನು ಬಳಸುತ್ತಿದೆ ಎಂದು ಹೇಳಿಕೆ ಕೊಟ್ಟ ನಂತರ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯೆ ನೀಡಿದೆ.
ಭಾರತದ ಬಂದರುಗಳ ಬಳಕೆಯ ಬಗ್ಗೆ ಹರಡುತ್ತಿರುವ ಹೇಳಿಕೆಗಳನ್ನು ಭಾರತದ ವಿದೇಶಾಂಗ ಸಚಿವಾಲಯ ಸಂಪೂರ್ಣವಾಗಿ ತಿರಸ್ಕರಿಸಿದ್ದು, ಇದನ್ನು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದೆ. ಫೆಬ್ರವರಿ 28 ರಂದು, ಅಮೆರಿಕ ಮತ್ತು ಇಸ್ರೇಲ್ ಹಲವಾರು ಇರಾನಿನ ನಗರಗಳ ಮೇಲೆ ಸಂಘಟಿತ ವೈಮಾನಿಕ ದಾಳಿ ನಡೆಸಿದ್ದವು. ಈ ದಾಳಿಗಳು ಮಿಲಿಟರಿ ಕಮಾಂಡ್ ಕೇಂದ್ರಗಳು, ವಾಯು ರಕ್ಷಣಾ ವ್ಯವಸ್ಥೆಗಳು, ಕ್ಷಿಪಣಿ ನೆಲೆಗಳು ಹಾಗೂ ಇತರ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಳ್ಳಲಾಗಿತ್ತು.
ಈ ದಾಳಿಗಳಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ನಾಲ್ವರು ಹಿರಿಯ ಮಿಲಿಟರಿ ಮತ್ತು ಭದ್ರತಾ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಟೆಹ್ರಾನ್ ಮತ್ತು ಇತರ ಪ್ರಮುಖ ನಗರಗಳಲ್ಲಿ ದೊಡ್ಡ ಸ್ಫೋಟಗಳು ದಾಖಲಾಗಿದ್ದು, ಈ ಪ್ರದೇಶದ ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ, ಇರಾನ್ ಅಮೆರಿಕದ ನೆಲೆಗಳು ಮತ್ತು ಅದರ ಮಿತ್ರರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ಬ್ಯಾಲಿಸ್ಟಿಕ್ ಕ್ಷಿಪಣಿಗಳು ಮತ್ತು ಡ್ರೋನ್ಗಳ ಮೂಲಕ ಪ್ರತೀಕಾರ ತೀರಿಸಿಕೊಂಡಿತು.
ಮತ್ತಷ್ಟು ಓದಿ: ಇರಾನ್ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ; ಟೆಹ್ರಾನ್ ತುಂಬ ದಟ್ಟ ಹೊಗೆ
ಇಸ್ರೇಲ್, ಬಹ್ರೇನ್, ಕುವೈತ್, ಕತಾರ್, ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಜೋರ್ಡಾನ್ನಂತಹ ದೇಶಗಳಲ್ಲಿನ ಗುರಿಗಳ ವರದಿಗಳು ಇಡೀ ಮಧ್ಯಪ್ರಾಚ್ಯವನ್ನು ಸಂಘರ್ಷಕ್ಕೆ ಎಳೆದಿವೆ. ಏತನ್ಮಧ್ಯೆ, ಗಲ್ಫ್ ಪ್ರದೇಶದಲ್ಲಿ ವಾಸಿಸುವ ಭಾರತೀಯ ನಾಗರಿಕರ ಸುರಕ್ಷತೆಯು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ವಿದೇಶಾಂಗ ಸಚಿವಾಲಯ ಪುನರುಚ್ಚರಿಸಿದೆ. ಸುಮಾರು 10 ಮಿಲಿಯನ್ ಭಾರತೀಯ ನಾಗರಿಕರು ಗಲ್ಫ್ ದೇಶಗಳಲ್ಲಿ ವಾಸಿಸುತ್ತಿದ್ದಾರೆ ಮತ್ತು ಕೆಲಸ ಮಾಡುತ್ತಿದ್ದಾರೆ, ಇದು ಆರ್ಥಿಕ ಮತ್ತು ರಾಜತಾಂತ್ರಿಕ ದೃಷ್ಟಿಕೋನದಿಂದ ಭಾರತಕ್ಕೆ ಈ ಪ್ರದೇಶವನ್ನು ಅತ್ಯಂತ ಮುಖ್ಯವಾಗಿದೆ.
Fake News Alert!
Claims being made on OAN, a US based channel that Indian ports are being used by the US Navy are fake and false. We caution you against such baseless and fabricated comments. pic.twitter.com/xiFWnkoXBk
— MEA FactCheck (@MEAFactCheck) March 4, 2026
ಪಶ್ಚಿಮ ಏಷ್ಯಾದಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಅದರ ರಾಷ್ಟ್ರೀಯ ಹಿತಾಸಕ್ತಿಗಳಿಗೆ ಅನುಗುಣವಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಸಚಿವಾಲಯ ತಿಳಿಸಿದೆ. ಯಾವುದೇ ತಪ್ಪು ಮಾಹಿತಿ ಅಥವಾ ಪರಿಶೀಲಿಸದ ವಿಚಾರಗಳ ಆಧಾರದ ಮೇಲೆ ಭಾರತ ತನ್ನ ವಿದೇಶಾಂಗ ನೀತಿಯನ್ನು ನಡೆಸುವುದಿಲ್ಲ ಮತ್ತು ರಾಷ್ಟ್ರೀಯ ಸಾರ್ವಭೌಮತ್ವಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಅದರ ನಿಲುವು ಸಂಪೂರ್ಣವಾಗಿ ಸ್ಪಷ್ಟ ಮತ್ತು ಸ್ವತಂತ್ರವಾಗಿದೆ ಎಂದು ಸರ್ಕಾರ ಸ್ಪಷ್ಟವಾಗಿ ಹೇಳಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ