ಬೆಂಗಳೂರು, ಆಗಸ್ಟ್ 4: ಒಟ್ಟಾರೆಯಾಗಿ ಕರ್ನಾಟಕದಲ್ಲಿ ನೈರುತ್ಯ ಮುಂಗಾರು (Monsoon Rain) ಸಾಮಾನ್ಯವಾಗಿದ್ದರೂ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಆಗಸ್ಟ್ 4 ಮತ್ತು 5ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 30-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ (Weather Forecast) ನೀಡಲಾಗಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡದಲ್ಲಿ ಶಾಲೆಗಳಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ಮಂಗಳೂರು ಉಪವಿಭಾಗದಲ್ಲಿ ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ಇಂದು ರಜೆ ಘೋಷಿಸಲಾಗಿದೆ. ಮಂಗಳೂರು, ಉಳ್ಳಾಲ, ಮೂಡುಬಿದಿರೆ, ಬಂಟ್ವಾಳ ಹಾಗೂ ಮುಲ್ಕಿ ತಾಲೂಕುಗಳಲ್ಲಿ ಹೈಸ್ಕೂಲ್ವರೆಗೆ ರಜೆ ನೀಡಲಾಗಿದೆ.
ಪುತ್ತೂರು ಉಪವಿಭಾಗದ ಪುತ್ತೂರು, ಬೆಳ್ತಂಗಡಿ, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಿಸಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ
ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಈ ಕುರಿತು ಆದೇಶ ಹೊರಡಿಸಿದ್ದಾರೆ.
ಯಾವೆಲ್ಲ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ?
ಕರಾವಳಿ ಕರ್ನಾಟಕದ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಬಹುತೇಕ ಕಡೆ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಬೆಂಗಳೂರು ನಗರ-ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು.
ಆಗಸ್ಟ್ 5ರಂದು ಮಳೆ ಮುಂದುವರಿಕೆ
ಆಗಸ್ಟ್ 5ರಂದು ಕೂಡ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ ಬಹುತೇಕ ಕಡೆ ಹಗುರದಿಂದ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಮಂಡ್ಯ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಎಲ್ಲೆಲ್ಲಿ ಭಾರೀ ಮಳೆಯಾಗಿದೆ, ಎಷ್ಟು?
ರಾಜ್ಯದಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿದ್ದು, ಕರಾವಳಿ ಕರ್ನಾಟಕದ ಬಹುತೇಕ ಭಾಗಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದಲ್ಲಿ 15 ಸೆಂ.ಮೀ. ಅತಿ ಭಾರಿ ಮಳೆ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ 12 ಸೆಂ.ಮೀ. ಮಳೆಯಾಗಿದೆ.
ಇದನ್ನೂ ಓದಿ:
ಬೆಳಗಾವಿ ಜಿಲ್ಲೆಯ ಲೋಂಡಾದಲ್ಲಿ 11 ಸೆಂ.ಮೀ., ಬೆಳ್ತಂಗಡಿಯಲ್ಲಿ 10 ಸೆಂ.ಮೀ., ಉಡುಪಿಯ ಕೊಲ್ಲೂರಿನಲ್ಲಿ 9 ಸೆಂ.ಮೀ., ಕೊಡಗಿನ ಭಾಗಮಂಡಲದಲ್ಲಿ 8 ಸೆಂ.ಮೀ., ಧರ್ಮಸ್ಥಳದಲ್ಲಿ 8 ಸೆಂ.ಮೀ., ಶಿವಮೊಗ್ಗದ ತಾಳಗುಪ್ಪದಲ್ಲಿ 8 ಸೆಂ.ಮೀ. ಹಾಗೂ ಆಗುಂಬೆಯಲ್ಲಿ 7 ಸೆಂ.ಮೀ. ಮಳೆ ದಾಖಲಾಗಿದೆ. ಉತ್ತರ ಕನ್ನಡದ ಜಗಲಬೆಟ್, ದಕ್ಷಿಣ ಕನ್ನಡದ ಮೂಡುಬಿದಿರೆ ಹಾಗೂ ಸುಳ್ಯದಲ್ಲೂ ತಲಾ 7 ಸೆಂ.ಮೀ. ಮಳೆಯಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
