ಬೆಂಗಳೂರು, ಜೂನ್ 22: ರಾಜ್ಯದಲ್ಲಿ ಮುಂಗಾರು ಮಳೆ (Weather) ಮತ್ತೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಟ್ಟು 13 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಖ್ಯಾಂಶಗಳು
- ರಾಜ್ಯದ 13 ಜಿಲ್ಲೆಗಳಿಗೆ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯ ಯೆಲ್ಲೋ ಅಲರ್ಟ್.
- ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ.
- ಮಲೆನಾಡು ಮತ್ತು ಉತ್ತರ ಒಳನಾಡಿನ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚನೆ.
ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್?
ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯ ಸಮಯದಲ್ಲಿ ಗುಡುಗು ಮತ್ತು ಬಿರುಗಾಳಿಯ ತೀವ್ರತೆ ಹೆಚ್ಚಿರಲಿದ್ದು, ಸಾರ್ವಜನಿಕರು ಹಾಗೂ ರೈತರು ಸುರಕ್ಷಿತ ಸ್ಥಳಗಳಲ್ಲೇ ಆಶ್ರಯ ಪಡೆಯಲು ಹವಾಮಾನ ಇಲಾಖೆ ಸೂಚಿಸಿದೆ.
ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ
ಕರಾವಳಿಯ ಜಿಲ್ಲೆಗಳಲ್ಲಿ ಮುಂಗಾರು ಮಾರುತಗಳ ಆರ್ಭಟ ಜೋರಾಗಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಉತ್ತರ ಕರ್ನಾಟಕದ ಭಾಗಗಳಲ್ಲೂ ಮಳೆಯ ಚಟುವಟಿಕೆಗಳು ಗಣನೀಯವಾಗಿ ಹೆಚ್ಚಾಗಲಿವೆ. ಧಾರವಾಡ, ಹಾವೇರಿ, ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ಮಲೆನಾಡಿನಲ್ಲೂ ಮಳೆಯಬ್ಬರ
ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣದೊಂದಿಗೆ ಮಳೆ ಮುಂದುವರಿಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ತಂಪಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ