Karnataka Weather Forecast: ಕರ್ನಾಟಕದಲ್ಲಿ ಮಳೆ ಅಬ್ಬರ ಜೋರು: 7 ಜಿಲ್ಲೆಗಳಲ್ಲಿ ವರ್ಷಧಾರೆ ಸಾಧ್ಯತೆ, ಯೆಲ್ಲೋ ಅಲರ್ಟ್ – Kannada News | Karnataka Weather Forecast on August 5: Heavy Rain Alert for Coastal and Malnad Districts

ನೆಲಮಂಗಲದಲ್ಲಿ ಸುರಿದ ಭಾರಿ ಮಳೆImage Credit source: tv9

ಬೆಂಗಳೂರು, ಆಗಸ್ಟ್ 5: ಕರ್ನಾಟಕದಲ್ಲಿ ಮುಂಗಾರು ಮಳೆ (Monsoon Rain) ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 5ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ (Weather Forecast) ನೀಡಲಾಗಿದೆ. ಇದೇ ವೇಳೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಎಚ್ಚರಿಕೆ ಸಂದೇಶದಲ್ಲೂ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಕರಾವಳಿ ಕರ್ನಾಟಕದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವೆಡೆ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಬೆಂಗಳೂರಿಗೆ ಇಂದೂ ಮಳೆ ಮುನ್ಸೂಚನೆ

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳ ಹಲವು ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಆಗಸ್ಟ್ 6ರ ಹವಾಮಾನ ಮುನ್ಸೂಚನೆ

ಆಗಸ್ಟ್ 6ರಂದು ಕೂಡ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಹಿನ್ನೆಲೆಯಲ್ಲಿ ಜನರು, ವಿಶೇಷವಾಗಿ ಮಳೆ ಹಾಗೂ ಗಾಳಿ ಹೆಚ್ಚಾಗುವ ಸಾಧ್ಯತೆ ಇರುವ ಪ್ರದೇಶಗಳ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕಾಗಿದೆ.

ಎಲ್ಲೆಲ್ಲಿ ಹೆಚ್ಚು ಮಳೆಯಾಗಿದೆ?

ಮಂಗಳವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 16 ಸೆಂ.ಮೀ., ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ 15 ಸೆಂ.ಮೀ., ದಕ್ಷಿಣ ಕನ್ನಡದ ಮಂಗಳೂರಿನಲ್ಲಿ 14 ಸೆಂ.ಮೀ. ಹಾಗೂ ಉಡುಪಿ ಜಿಲ್ಲೆಯ ಸಿದ್ದಾಪುರದಲ್ಲಿ 14 ಸೆಂ.ಮೀ. ಮಳೆ ದಾಖಲಾಗಿದೆ. ಉತ್ತರ ಕನ್ನಡದ ಗೇರುಸೊಪ್ಪದಲ್ಲಿ 13 ಸೆಂ.ಮೀ. ಹಾಗೂ ದಕ್ಷಿಣ ಕನ್ನಡದ ಶಕ್ತಿ ನಗರ Obsyನಲ್ಲಿ 13 ಸೆಂ.ಮೀ. ಮಳೆಯಾಗಿದೆ. ಉಡುಪಿಯ ಕೊಲ್ಲೂರು ಮತ್ತು ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ತಲಾ 11 ಸೆಂ.ಮೀ., ಬಂಟ್ವಾಳದಲ್ಲಿ 10 ಸೆಂ.ಮೀ. ಮಳೆಯಾಗಿದೆ.

ಉಡುಪಿ ಜಿಲ್ಲೆಯ ಕಾರ್ಕಳ, ದಕ್ಷಿಣ ಕನ್ನಡದ ಪುತ್ತೂರು, ಮಾಣಿ, ಮುಡಬಿದ್ರೆ ಹಾಗೂ ಉತ್ತರ ಕನ್ನಡದ ಜಾಗಲಬೆಟ್‌ನಲ್ಲಿ ತಲಾ 9 ಸೆಂ.ಮೀ. ಮಳೆ ದಾಖಲಾಗಿದೆ. ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ 9 ಸೆಂ.ಮೀ. ಮಳೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *