ಬೆಂಗಳೂರು, ಆಗಸ್ಟ್ 19: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿರುವ ದಾಳಿ, ಶೋಧ ಕಾರ್ಯ ಬುಧವಾರವೂ ಮುಂದುವರಿದಿದೆ. ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಅವರ ನಿವಾಸ ಸೇರಿದಂತೆ ಒಟ್ಟು 21 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಈ ತನಿಖೆಯು ಸತತ 22 ಗಂಟೆಗಳಿಂದ ನಡೆಯುತ್ತಿದ್ದು, ತಡರಾತ್ರಿಯೂ ಅಧಿಕಾರಿಗಳು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಕೆಪಿಎಸ್ಸಿ ನೇಮಕಾತಿಯಲ್ಲಿ ಭಾರಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಯ ಆರೋಪಗಳಿವೆ. ನಿರ್ದಿಷ್ಟವಾಗಿ ಪಶುವೈದ್ಯಕೀಯ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಇಡಿ ಅಧಿಕಾರಿಗಳು ತೀವ್ರ ತನಿಖೆ ನಡೆಸುತ್ತಿದ್ದಾರೆ. ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ ಎಂಬ ಸಂಶಯದ ಮೇಲೆ ಇಡಿ ಪ್ರಕರಣ ದಾಖಲಿಸಿಕೊಂಡಿದೆ. ಪ್ರತಿ ನೇಮಕಾತಿಗೆ 80 ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ ಆರೋಪವೂ ಇದೆ.
ದಾಳಿಯ ವೇಳೆ, ಶಿವಶಂಕರಪ್ಪ ಅವರ ಮನೆಯಲ್ಲಿರುವ ದಾಖಲೆಗಳು, ಬ್ಯಾಂಕ್ ಖಾತೆಗಳು ಮತ್ತು ಇತರೆ ಸಂಬಂಧಪಟ್ಟ ವಿವರಗಳನ್ನು ಇಡಿ ಅಧಿಕಾರಿಗಳು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ. ಈ ಶೋಧ ಕಾರ್ಯಾಚರಣೆ ಮುಂದುವರೆಯುವ ಸಾಧ್ಯತೆ ಇದೆ. ಈ ಹಿಂದೆ ಸಿಐಡಿ ಕೂಡ ಕೆಪಿಎಸ್ಸಿ ಹಗರಣಗಳ ಬಗ್ಗೆ ತನಿಖೆ ನಡೆಸುತ್ತಿದ್ದು, ಈಗ ಇಡಿ ಪ್ರವೇಶದಿಂದ ತನಿಖೆ ಮತ್ತಷ್ಟು ತೀವ್ರಗೊಂಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
