Headlines

NEET ವಿಚಾರವಾಗಿ ಕೇಂದ್ರ ಸಚಿವರ ರಾಜೀನಾಮೆ ಬೆನ್ನಲ್ಲೇ ಕರ್ನಾಟಕದಲ್ಲಿ ನಡೆದ ಗಂಭೀರ ಘಟನೆಗಳಿಗೆ ಹೊಣೆ ಯಾರೆಂದು ಕಾಂಗ್ರೆಸ್​​ಗೆ ಅಶೋಕ್​​ ಪ್ರಶ್ನೆ – Kannada News | Ashoka Questions Congress Over Accountability for Karnataka’s Major Incidents

ಆರ್. ಅಶೋಕ್Image Credit source: PTI

ಬೆಂಗಳೂರು, ಜುಲೈ 26: ಕರ್ನಾಟಕದ ಕಾಂಗ್ರೆಸ್ ವಿರುದ್ಧ ದ್ವಂದ್ವ ನೀತಿ ಆರೋಪ ಮಾಡಿ ಎಕ್ಸ್ ಪೋಸ್ಟ್ ಮೂಲಕ ಸರ್ಕಾರದ ವಿರುದ್ಧ ವಿಧಾನ ಸಭೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ ಕಾರಿದ್ದಾರೆ. ಕೇಂದ್ರದಲ್ಲಿ NEET ಪರೀಕ್ಷೆಗೆ ಸಂಬಂಧಿಸಿದ ಬೆಳವಣಿಗೆಯ ಹಿನ್ನೆಲೆಯಲ್ಲಿ ರಾಜಕೀಯ ಹಾಗೂ ಆಡಳಿತಾತ್ಮಕ ಹೊಣೆ ಹೊತ್ತು ಕೇಂದ್ರ ಸಚಿವರು ರಾಜೀನಾಮೆ ನೀಡಿದ್ದಾರೆ. ಹಾಗಾದರೆ ಕರ್ನಾಟಕದಲ್ಲಿ ನಡೆದ ಗಂಭೀರ ಘಟನೆಗಳಿಗೆ ನೈತಿಕ ಮತ್ತು ಆಡಳಿತಾತ್ಮಕ ಹೊಣೆ ಯಾರು ಹೊರುತ್ತಾರೆ? ಎಂದವರು ಖಾರವಾಗಿ ಪ್ರಶ್ನಿಸಿದ್ದಾರೆ.

ಸರ್ಕಾರಕ್ಕೆ ಅಶೋಕ್​​ ಸಾಲು ಸಾಲು ಪ್ರಶ್ನೆ

KPSC ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಒಂದು ಹುದ್ದೆಗೆ ₹80 ಲಕ್ಷ ಡೀಲ್ ನಡೆದಿರುವ ಆರೋಪದ ಆಡಿಯೋ ಬಹಿರಂಗವಾಗಿದೆ. ಈ ಆರೋಪಗಳ ಕುರಿತು ಸಮಗ್ರ, ಸ್ವತಂತ್ರ ಮತ್ತು ಪಾರದರ್ಶಕ ತನಿಖೆ ಯಾವಾಗ? ಐಪಿಎಲ್ ವಿಜಯೋತ್ಸವದ ಕಾಲ್ತುಳಿತ ದುರಂತದಲ್ಲಿ 11 ಅಮಾಯಕ ಜೀವಗಳು ಬಲಿಯಾದವು. ಆ ದುರಂತಕ್ಕೆ ನೈತಿಕ ಮತ್ತು ಆಡಳಿತಾತ್ಮಕ ಹೊಣೆ ಯಾರು ಹೊರುತ್ತಾರೆ? ನೊಂದ ಕುಟುಂಬಗಳಿಗೆ ಸಂಪೂರ್ಣ ನ್ಯಾಯ ಯಾವಾಗ ದೊರೆಯುತ್ತದೆ? ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕಳೆದ ಮೂರು ವರ್ಷಗಳಲ್ಲಿ ಸಾವಿರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಕ್ರೋ ಫೈನಾನ್ಸ್ ಹಾವಳಿ ತಡೆಯಲಾರದೆ ನೂರಾರು ಬಡವ ಸಾಲಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ? ಇದಕ್ಕೆಲ್ಲ ಯಾರು ಹೊಣೆ? ಎಂದವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ; 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದ ಮಾಜಿ ಸಿಎಂ

ಪ್ರಜಾಪ್ರಭುತ್ವದಲ್ಲಿ ಅಧಿಕಾರ ಎಂದರೆ ಕೇವಲ ಹುದ್ದೆಯಲ್ಲ; ಅದರೊಂದಿಗೆ ಜವಾಬ್ದಾರಿಯೂ ಇರುತ್ತದೆ. ತಪ್ಪುಗಳು ನಡೆದಾಗ ಅಧಿಕಾರಿಗಳ ಮೇಲೆ ಗೂಬೆ ಕೂರಿಸದೆ, ನಾಮಕಾವಸ್ತೆ ತನಿಖೆಗಳ ಹೆಸರಿನಲ್ಲಿ ತಪ್ಪಿಸಿಕೊಳ್ಳದೆ ಉತ್ತರದಾಯಿತ್ವ ಸ್ವೀಕರಿಸಬೇಕು. ಪ್ರತಿಯೊಂದು ಪ್ರಕರಣದಲ್ಲೂ ಸತ್ಯ ಹೊರಬರಬೇಕು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮವಾಗಬೇಕು ಹಾಗೂ ಜನರ ವಿಶ್ವಾಸವನ್ನು ಮರುಸ್ಥಾಪಿಸುವ ಕಾರ್ಯ ನಡೆಯಬೇಕು ಎಂದವರು ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 1:44 pm, Sun, 26 July 26

Source link

Leave a Reply

Your email address will not be published. Required fields are marked *