ಮೈಸೂರು, ಡಿಸೆಂಬರ್ 26: ಅಯೋಧ್ಯೆ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡುವ ಮೂಲಕ ಇಡೀ ದೇಶದ ಗಮನವನ್ನು ಸೆಳೆದಿರುವ ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಅವರು, ಕಾಂಗ್ರೆಸ್ನ ಹಿರಿಯ ಮುತ್ಸದ್ದಿ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ದಿ.ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರ ಪುತ್ಥಳಿ ಕೆತ್ತನೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ.
ದಿ.ಶಾಮನೂರು ಶಿವಶಂಕರಪ್ಪ ಪುತ್ಥಳಿ ಅನಾವರಣ
ದಾವಣಗೆರೆ ನಗರದ ಆನೆಕೊಂಡದ ಕಲ್ಲೇಶ್ವರ ರೈಸ್ ಮಿಲ್ ಆವರಣದ ನೂರು ಎಕರೆ ಪ್ರದೇಶದಲ್ಲಿ ಶುಕ್ರವಾರದಲ್ಲಿ ನಡೆದ ದಿ.ಶಾಮನೂರು ಶಿವಶಂಕರಪ್ಪ ನುಡಿ ನಮನ ಕಾರ್ಯಕ್ರಮದಲ್ಲಿ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತನೆಯ ಪುತ್ಥಳಿಯನ್ನು ಗಣ್ಯರು ಅನಾವರಣಗೊಳಿಸಿದ್ದಾರೆ.
ಅರುಣ್ ಯೋಗಿರಾಜ್ ಟ್ವೀಟ್
ದಿ.ಶಾಮನೂರು ಶಿವಶಂಕರಪ್ಪ ಅವರ ಪುತ್ಥಳಿ ಕೆತ್ತನೆ ಬಗ್ಗೆ ಶಿಲ್ಪಿ ಅರುಣ್ ಯೋಗಿರಾಜ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮಾಜಿ ಸಚಿವ ಮತ್ತು ಖ್ಯಾತ ಸಮಾಜ ಸುಧಾರಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ಪ್ರತಿಮೆಯನ್ನು ಕೆತ್ತನೆ ಮಾಡುವ ಅವಕಾಶ ನನಗೆ ಸಿಕ್ಕಿದ್ದು ಭಾಗ್ಯ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: Shamanur Shivashankarappa Death: ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ
ಕೊಡುಗೈ ದಾನಿ, ಶಿಕ್ಷಣ ಸಂಸ್ಥೆಗಳ ಒಡೆಯ, ಪ್ರಭಾವಿ ವೀರಶೈವ ಲಿಂಗಾಯತ ಸಮಾಜದ ಮುಖಂಡ, ಹಿರಿಯ ರಾಜಕಾರಣಿ, ಮಾಜಿ ಮಂತ್ರಿ, ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ಡಿಸೆಂಬರ್ 14ರಂದು ನಿಧನರಾಗಿದ್ದಾರೆ. 94 ವರ್ಷದ ಶಾಮನೂರು ಶಿವಶಂಕರಪ್ಪ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಡಿಸೆಂಬರ್ 14ರ ಸಂಜೆ 6ಗಂಟೆ 45 ನಿಮಿಷಕ್ಕೆ ಕೊನೆಯುಸಿರೆಳೆದಿದ್ದರು. ಅವರ ಪತ್ನಿ ಸಮಾಧಿ ಪಕ್ಕದಲ್ಲೇ ಅವರ ಅಂತ್ಯಕ್ರಿಯೆಯನ್ನು ಮಾಡಲಾಗಿದೆ.
ಇದನ್ನೂ ಓದಿ: ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ ಎಸ್ಎಸ್
ಇನ್ನು ಇಂದು ದಾವಣಗೆರೆಯಲ್ಲಿ ನಡೆದ ದಿ.ಶಾಮನೂರು ಶಿವಶಂಕರಪ್ಪ ನುಡಿ ನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ, ಬಿಎಸ್ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ಹಾಗೂ ಜಗದೀಶ್ ಶೆಟ್ಟರ್, ಪಂಚಪೀಠದ ರಂಭಾಪುರಿ ಕಾಶಿ ಶ್ರೀಶೈಲ ಉಜ್ಜಯಿನಿ ನಾಲ್ವರು ಹಾಗೂ ಇತ್ತ ಸಿರಿಗೆರೆ ಸುತ್ತೂರು ಸಿದ್ದಗಂಗಾ, ಪಂಚಮಸಾಲಿ ಹೀಗೆ ಸ್ವಾಮೀಜಿಗಳು ಭಾಗವಹಿಸಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On – 9:16 pm, Fri, 26 December 25