PM Modi Speech: ಸಕ್ಕರೆ ನಾಡಲ್ಲಿ ರಾಗಿ ಮುದ್ದೆಯ ಗುಣಗಾನ, ಕರ್ನಾಟಕದ ದೇಸಿ ಆಹಾರದ ತಾಕತ್ತು ಕೊಂಡಾಡಿದ ನರೇಂದ್ರ ಮೋದಿ – Kannada News | PM Modi Praises Ragi Mudde and Karnataka Culture in Mandya: A Call for Millets

ಮಂಡ್ಯ, ಏಪ್ರಿಲ್ 15: ರಾಗಿ ಮುದ್ದೆ ಕೇವಲ ಆಹಾರವಲ್ಲ ಅದೊಂದು ಶಕ್ತಿ, ಮಂಡ್ಯದಲ್ಲಿ ದೇವೇಗೌಡರು ಅದನ್ನು ಫೇಮಸ್ ಮಾಡಿದ್ದಾರೆ, ಯುವಕರು ರಾಗಿ ಮುದ್ದೆ ಹಾಗೂ ನವಧಾನ್ಯಗಳನ್ನು ಹೆಚ್ಚು ಸೇವಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಂಡ್ಯದ ಆದಿಚುಂಚನಗಿರಿ ಮಠದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಕರ್ನಾಟಕದ ಸಂಸ್ಕೃತಿ ಮತ್ತು ಮಠದ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

ಕರ್ನಾಟಕಕ್ಕೆ ಬರುವುದೆಂದರೆ ನನಗೆ ಖುಷಿಯ ವಿಷಯ. ಇಲ್ಲಿಗೆ ಬಂದಾಗಲೆಲ್ಲಾ ಹೊಸ ಪ್ರೇರಣೆ ಸಿಗುತ್ತದೆ. ಅದರಲ್ಲೂ ಸಕ್ಕರೆ ನಾಡು ಮಂಡ್ಯಕ್ಕೆ ಬಂದಿರುವುದು ಈ ಭೇಟಿಯನ್ನು ಇನ್ನಷ್ಟು ಮಹತ್ವಪೂರ್ಣವಾಗಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದರು.

ತತ್ವಜ್ಞಾನ ಮತ್ತು ತಂತ್ರಜ್ಞಾನದ ಸಮೃದ್ಧಿ
ಕರ್ನಾಟಕದ ಮಣ್ಣಿನ ಗುಣವನ್ನು ಬಣ್ಣಿಸಿದ ಪ್ರಧಾನಿ, ಈ ಮಣ್ಣು ತತ್ವಜ್ಞಾನ ಮತ್ತು ತಂತ್ರಜ್ಞಾನ ಎರಡರಲ್ಲೂ ಸಮೃದ್ಧವಾಗಿದೆ. ಇಲ್ಲಿ ದರ್ಶನದ ಆಳವೂ ಇದೆ, ಟೆಕ್ನಾಲಜಿಯ ಶಕ್ತಿಯೂ ಇದೆ. ಆದಿಚುಂಚನಗಿರಿ ಮಠವು ಕಳೆದ ಎರಡು ಸಾವಿರ ವರ್ಷಗಳಿಂದ ಭಾರತದ ನೈತಿಕ ಮತ್ತು ಆಧ್ಯಾತ್ಮಿಕ ಮೌಲ್ಯಗಳನ್ನು ಜೀವಂತವಾಗಿರಿಸಿರುವ ಸಾಕ್ಷಾತ್ ರೂಪ ಎಂದರು.

ಬಾಲಗಂಗಾಧರನಾಥ ಶ್ರೀಗಳು: ಕೇವಲ ಸಂತರಲ್ಲ, ಸಮಾಜದ ಬಂಧು
ಪೂಜ್ಯ ಬಾಲಗಂಗಾಧರನಾಥ ಸ್ವಾಮೀಜಿಯವರನ್ನು ಸ್ಮರಿಸಿದ ಮೋದಿ, ಅವರು ಕೇವಲ ಆಧ್ಯಾತ್ಮಿಕ ಮಾರ್ಗದರ್ಶನಕ್ಕೆ ಸೀಮಿತವಾಗಿರಲಿಲ್ಲ. ಗ್ರಾಮೀಣ ಭಾಗದಿಂದ ಬಂದಿದ್ದರಿಂದ ಅವರಿಗೆ ಹಳ್ಳಿಯ ಯುವಕರ ಆಕಾಂಕ್ಷೆ ಮತ್ತು ಸವಾಲುಗಳ ಅರಿವಿತ್ತು. ಭಕ್ತಿ ಎಂದರೆ ಸಮಾಜದಿಂದ ದೂರ ಹೋಗುವುದಲ್ಲ, ಸಮಾಜದ ಜವಾಬ್ದಾರಿ ತೆಗೆದುಕೊಳ್ಳುವುದು ಎಂದು ಅವರು ತೋರಿಸಿಕೊಟ್ಟರು. ಬಡ ಮಕ್ಕಳಿಗೆ ಎಂಜಿನಿಯರಿಂಗ್, ಮೆಡಿಕಲ್ ಶಿಕ್ಷಣ ನೀಡುವ ಮೂಲಕ ಅವರು ಶೈಕ್ಷಣಿಕ ಕ್ರಾಂತಿ ಮಾಡಿದ್ದಾರೆ ಎಂದು ಗುಣಗಾನ ಮಾಡಿದರು.

ಮನುಷ್ಯರಷ್ಟೇ ಅಲ್ಲ, ಜೀವಿಗಳ ಮೇಲೂ ಕರುಣೆ
ಸ್ವಾಮೀಜಿಯವರ ಪರಿಸರ ಪ್ರೇಮವನ್ನು ಮೆಚ್ಚಿದ ಪ್ರಧಾನಿ, ಅವರ ಕರುಣೆ ಕೇವಲ ಮನುಷ್ಯರಿಗೆ ಸೀಮಿತವಾಗಿರಲಿಲ್ಲ. ರಾಷ್ಟ್ರಪಕ್ಷಿ ನವಿಲುಗಳ ಸಂರಕ್ಷಣೆಗಾಗಿ ಅವರು ನಡೆಸಿದ ಸಾಮಾಜಿಕ ಆಂದೋಲನವು ಇಂದಿಗೂ ನಮಗೆ ಮಾದರಿ. ಪರಿಸರ ಸಂರಕ್ಷಣೆ ನಮ್ಮ ಸಾಂಸ್ಕೃತಿಕ ಚೇತನದ ಭಾಗ ಎಂಬುದನ್ನು ಅವರು ಸಾಬೀತುಪಡಿಸಿದರು ಎಂದರು.

ಅನ್ನ, ಅಕ್ಷರ, ಆರೋಗ್ಯ ಮತ್ತು ಅಧ್ಯಾತ್ಮ, ಆಶ್ರಯ, ಅರಣ್ಯ ಮತ್ತು ಅನುಕಂಪ. ಆಕಳು (ಗೋರಕ್ಷಣೆ), ಅನುಬಂಧ ಮತ್ತು ಸ್ವಚ್ಛತೆ ಈ ಸೇವೆಯನ್ನು ಮೋದಿ ಶ್ಲಾಘಿಸಿದರು. ಈ ಮಠವು ಸ್ವದೇಶಿ ಮತ್ತು ಆತ್ಮನಿರ್ಭರತೆಯ ಸಂಕೇತವಾಗಿದೆ. ನಮ್ಮ ಸರ್ಕಾರ ಕೂಡ ಆಯುಷ್ಮಾನ್ ಭಾರತ್ ಅಡಿಯಲ್ಲಿ ಉಚಿತ ಚಿಕಿತ್ಸೆ ನೀಡುವ ಮೂಲಕ ಮಠದ ಆಶಯದಂತೆಯೇ ಆರೋಗ್ಯ ಸೇವೆಯನ್ನು ಬಡವರಿಗೆ ತಲುಪಿಸುತ್ತಿದೆ ಎಂದು ಮೋದಿ ಅವರು ಸರ್ಕಾರದ ಯೋಜನೆಗಳನ್ನು ಮಠದ ಸೇವೆಯೊಂದಿಗೆ ಸಮೀಕರಿಸಿದರು.

ಭೈರವೈಕ್ಯ ಮಂದಿರದಲ್ಲಿ ಬಾಲಗಂಗಾಧರನಾಥ ಶ್ರೀಗಳ ಆಶೀರ್ವಾದ ಪಡೆದಿದ್ದು ನನ್ನ ಭಾಗ್ಯ. ಅವರ ಪರಂಪರೆ ನಮ್ಮೆಲ್ಲರಿಗೂ ಕರ್ತವ್ಯದ ಹಾದಿಯಲ್ಲಿ ನಡೆಯಲು ಸ್ಫೂರ್ತಿ ನೀಡಲಿ ಎಂದು ಹಾರೈಸಿದರು.

ಕರ್ನಾಟಕದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Leave a Reply

Your email address will not be published. Required fields are marked *