ಬೆಂಗಳೂರು, 30: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯದಲ್ಲಿ ತೊಡಗಿದ್ದ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಬೆಂಗಳೂರಿನ (Bengaluru) ಪುಲಿಕೇಶಿನಗರದಲ್ಲಿ ಸುಮಾರು ಎಂಟು ಮಂದಿ ಸೇರಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಪ್ರಜೆಗಳೆಂದು ಹೇಳಲಾದವರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಲು ನಿರಾಕರಿಸಿದ್ದಕ್ಕೆ ಈ ಹಲ್ಲೆ ನಡೆದಿದೆ ಎಂದು ಬಿಜೆಪಿ ಆರೋಪಿಸಿದೆ.
ರಾಜ್ಯ ಗೃಹ ಸಚಿವರ ರಾಜೀನಾಮೆಗೆ ಆಗ್ರಹ
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಉಪಮೇಯರ್ ಎಸ್. ಹರೀಶ್, ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು. ಸರ್ಕಾರಿ ಅಧಿಕಾರಿಗಳು ಭಯದ ವಾತಾವರಣದಲ್ಲಿ ಕೆಲಸ ಮಾಡುವಂತಾಗಿದೆ ಎಂದು ಅವರು ದೂರಿದ್ದಾರೆ. ಪುಲಿಕೇಶಿನಗರ ಕ್ಷೇತ್ರದ 10 ಮತಗಟ್ಟೆಗಳಲ್ಲಿ ಎಸ್ಐಆರ್ ಕಾರ್ಯದ ಮೇಲ್ವಿಚಾರಣೆ ಮಾಡುತ್ತಿದ್ದ ಸೂಪರಿಂಟೆಂಡೆಂಟ್ ಹುದ್ದೆಯ ಅಧಿಕಾರಿ ಫಕೀರಪ್ಪ ಅವರ ಮೇಲೆ ಹಲ್ಲೆ ನಡೆಸಲಾಗಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ. ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದ್ದರೂ, ಹಲ್ಲೆಯಲ್ಲಿ ಭಾಗಿಯಾಗಿದ್ದ ಇನ್ನೂ ಹಲವರನ್ನು ಬಂಧಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಇದನ್ನೂ ಓದಿ: ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ, ಬಾಂಗ್ಲಾದೇಶದಿಂದ ಬಂದವರ ಪೋಷಣೆ: ಕುಮಾರಸ್ವಾಮಿ ಗಂಭೀರ ಆರೋಪ
ಫಕೀರಪ್ಪ ಅವರನ್ನು ರಸ್ತೆಯಲ್ಲಿ ಎಳೆದಾಡಿ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ. ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಪ್ರಜೆಗಳೆಂದು ಹೇಳಲಾದವರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರಿಸಲು ಒತ್ತಡ ಹೇರಲಾಗಿತ್ತು. ಆದರೆ, ಅವರು ಇವರು ಅಕ್ರಮ ನುಸುಳುಕೋರರು. ಅಗತ್ಯ ದಾಖಲೆಗಳಿಲ್ಲದ ಕಾರಣ ಹೆಸರು ಸೇರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇದರಿಂದಲೇ ಸುಮಾರು ಏಳು-ಎಂಟು ಮಂದಿ ಸೇರಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಫಕೀರಪ್ಪ ಅವರ ಹಲ್ಲುಗಳಿಗೆ ಹಾನಿಯಾಗಿದ್ದು, ತುಟಿಗಳಿಗೆ ಗಾಯಗಳಾಗಿವೆ. ಅವರು ಆಸ್ಪತ್ರೆಗೆ ದಾಖಲಾಗಿದ್ದು, ಘಟನೆ ಬಗ್ಗೆ ಮಾತನಾಡಲೂ ಹೆದರುತ್ತಿದ್ದಾರೆ ಎಂದು ಅವರು ತಿಳಿಸಿರೋದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On – 4:41 pm, Thu, 30 July 26