Headlines

SIR: ಬಿಎಲ್‌ಒಗಳು ಕಡ್ಡಾಯವಾಗಿ ಮನೆ ಮನೆಗೆ ಹೋಗಿ ಫಾರಂ ನೀಡಬೇಕು, ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಖಡಕ್ ಸೂಚನೆ – Kannada News | Karnataka SIR Process: Chief Electoral Officer V Anbukkumar Orders BLOs to Conduct Door to Door Survey

ಬೆಂಗಳೂರು, ಜುಲೈ 3: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕಾರ್ಯಕ್ರಮದಲ್ಲಿ ಬಿಎಲ್‌ಒಗಳು (ಬೂತ್ ಮಟ್ಟದ ಅಧಿಕಾರಿಗಳು) ನಿಯಮಾವಳಿಗಳನ್ನು ಗಾಳಿಗೆ ತೂರಿ ಕಚೇರಿ ಹಾಗೂ ಇತರೆಡೆ ಕುಳಿತು ಫಾರಂ ವಿತರಿಸುತ್ತಿದ್ದಾರೆ ಎಂಬ ಗಂಭೀರ ದೂರುಗಳು ಕೇಳಿಬಂದಿವೆ. ಇದರ ಬೆನ್ನಲ್ಲೇ, ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ (CEO) ವಿ. ಅನ್ಬುಕುಮಾರ್ ಐಎಎಸ್ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಜುಲೈ 2 ರಂದು ಬಂದಿರುವ ದೂರುಗಳನ್ನು ಆಧರಿಸಿ ಇಂದು (ಜುಲೈ 3) ರಾಜ್ಯದ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು, ಡೆಪ್ಯುಟಿ ಕಮಿಷನರ್‌ಗಳು ಹಾಗೂ ಜಿಬಿಎ ಮುಖ್ಯ ಆಯುಕ್ತರಿಗೆ ಅಧಿಕೃತ ಸುತ್ತೋಲೆ ರವಾನಿಸಿರುವ ಸಿಇಒ, ಭಾರತೀಯ ಚುನಾವಣಾ ಆಯೋಗದ (ECI) ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕಡಕ್ ಸೂಚನೆ ನೀಡಿದ್ದಾರೆ.

ಕಚೇರಿಗಳಲ್ಲಿ ಕೂತು ಫಾರಂ ಹಂಚುವಂತಿಲ್ಲ: ಸಿಇಒ ಖಡಕ್ ಎಚ್ಚರಿಕೆ

ಭಾರತೀಯ ಚುನಾವಣಾ ಆಯೋಗದ ನಿರ್ದೇಶನ ಹಾಗೂ ವೇಳಾಪಟ್ಟಿಯ ಪ್ರಕಾರ ಕರ್ನಾಟಕದಲ್ಲಿ ಜೂನ್ 30 ರಿಂದಲೇ ಮತದಾರರಿಗೆ ಎನ್ಯೂಮರೇಶನ್ ಫಾರಂಗಳನ್ನು (Enumeration Forms) ವಿತರಿಸುವ ಪ್ರಕ್ರಿಯೆ ಆರಂಭವಾಗಿದೆ. ಆದರೆ, ಬಿಎಲ್‌ಒಗಳು ಮನೆ ಮನೆಗೆ ಭೇಟಿ ನೀಡಿ ಫಾರಂ ಹಂಚುವ ಬದಲು, ಕಚೇರಿಗಳಲ್ಲೇ ಕುಳಿತು ವಿತರಿಸುತ್ತಿದ್ದಾರೆ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಪತ್ರ ಬರೆದಿರುವ ಸಿಇಒ ವಿ. ಅನ್ಬುಕುಮಾರ್, ‘ಎಲ್ಲಾ ಬಿಎಲ್‌ಒಗಳು ಕಡ್ಡಾಯವಾಗಿ ಪ್ರತಿಯೊಬ್ಬ ಮತದಾರನ ಮನೆ ಬಾಗಿಲಿಗೆ ಭೇಟಿ ನೀಡಿ ಫಾರಂ ವಿತರಿಸಬೇಕು. ವಿಶೇಷ ತೀವ್ರ ಪರಿಷ್ಕರಣೆಯ ಎಲ್ಲಾ ಹಂತಗಳಲ್ಲೂ ಇಸಿಐ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಧಿಕಾರಿಗಳು ಅಗತ್ಯ ನಿರ್ದೇಶನ ನೀಡಬೇಕು’ ಎಂದು ಆದೇಶಿಸಿದ್ದಾರೆ.

ಇದೇ ವೇಳೆ, ಫಾರಂ ತುಂಬಲು ಕಷ್ಟಪಡುವ ಮತದಾರರು ‘ಮತದಾರರ ಸಹಾಯ ಕೇಂದ್ರಗಳಿಗೆ (Voter Facilitation Centers)’ ಭೇಟಿ ನೀಡಿ ನೆರವು ಪಡೆಯಬಹುದು, ಈ ಕೇಂದ್ರಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದ್ದಾರೆ.

ರಾಮನಗರದಲ್ಲಿ ಎಸ್ಐಆರ್ ಅಕ್ರಮ ಆರೋಪ

ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಗುರುವಾರ ಗಂಭೀರ ಆರೋಪ ಮಾಡಿದ್ದರು. ಬಿಎಲ್‌ಒಗಳು ಮನೆ ಮನೆಗೆ ಹೋಗಿ ಪರಿಶೀಲನೆ ನಡೆಸುವ ಬದಲು, ರಾಮನಗರದ ಕಲ್ಯಾಣ ಮಂಟಪವೊಂದರಲ್ಲಿ (ಚೌಲ್ಟ್ರಿ) ಜನರನ್ನು ಕೂರಿಸಿ ಎಸ್‌ಐಆರ್ ಪ್ರಕ್ರಿಯೆ ನಡೆಸುತ್ತಿದ್ದಾರೆ. ‘ಕೈ’ ಸರ್ಕಾರದ ಸೂಚನೆಯಂತೆ ಬಾಂಗ್ಲಾದೇಶದ ವಲಸಿಗರನ್ನು ಮತದಾರರ ಪಟ್ಟಿಗೆ ಸೇರಿಸಲು ನಕಲಿ ಐಡಿ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.

ಜಯನಗರ ಮಸೀದಿಯಲ್ಲಿ ಎಸ್​ಐಆರ್: ವಿಜಯೇಂದ್ರ ಆರೋಪ

ಈ ಎಲ್ಲ ಬೆಳವಣಿಗೆಗಳ ನಡುವೆ, ಬೆಂಗಳೂರಿನ ಜಯನಗರದಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ಮಸೀದಿಯ ಒಳಗಡೆ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿವೈ ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರವು ಬಿಎಲ್‌ಒಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದು, ನಿಯಮಬಾಹಿರವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಯನಗರದ ಮಸೀದಿ ಒಳಗೆ ಎಸ್ಐಆರ್!: ಸ್ಫೋಟಕ ಆರೋಪ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *