
ಬೆಂಗಳೂರು, ಮಾರ್ಚ್ 17: ನಾಳೆಯಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಒಟ್ಟು 2871 ಕೇಂದ್ರಗಳಲ್ಲಿ ಎಕ್ಸಾಂ ನಡೆಯಲಿದೆ. ಈ ವರ್ಷ 9,02,889 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಆ ಪೈಕಿ 8,12,855 ಹೊಸಬರು ಪರೀಕ್ಷೆ ಬರೆಯಲಿದ್ದಾರೆ. 62,845 ರಿಪೀಟರ್ಸ್ ಮತ್ತು 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಆತಂಕದ ಹಿನ್ನೆಲೆ ತಡೆಗೆ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿ ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಮಾರ್ಗಸೂಚಿಯಲ್ಲಿ ಇರೋದೇನು?
- ಪರೀಕ್ಷಾ ಕೇಂದ್ರಗಳಲ್ಲಿ ಸಿಬ್ಬಂದಿ, ವಿದ್ಯಾರ್ಥಿಗಳಿಗೆ ಮೊಬೈಲ್ ನಿರ್ಬಂಧ
- ಸ್ಮಾಟ್ ವಾಚ್, ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ಪೂರ್ಣ ನಿಷೇಧ
- ಪರೀಕ್ಷಾ ಕೇಂದ್ರದಲ್ಲಿ ಅನಧಿಕೃತ ವ್ಯಕ್ತಿಗಳಿಂದ ಚಿತ್ರೀಕರಣಕ್ಕೆ ನಿಷೇಧ
- ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತು ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದು ನಿಷೇಧ
- ಯಾವುದೇ ವಿಷಯಗಳ ಮಾಹಿತಿ ರವಾನಿಸುವುದು ನಿಷೇಧ
- ಪರೀಕ್ಷೆಯನ್ನು ವೆಬ್ ಕಾಸ್ಟಿಂಗ್ ಮೂಲಕ ಮಾನಿಟರ್
- ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಕಡ್ಡಾಯ
ಇದನ್ನೂ ಓದಿ: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ
ವಿದ್ಯಾರ್ಥಿಗಳಿಗೆ ಸೂಚನೆ
ಈಗಾಗಲೇ ಬರೆದಿರುವ ಪೂರ್ವ ಸಿದ್ಧತಾ ಪರೀಕ್ಷೆಗಳು, ಮಂಡಳಿಯಿಂದ ನೀಡಲಾದ ನೀಲನಕ್ಷೆ (ಬ್ಲೂಪ್ರಿಂಟ್) ಮತ್ತು ಮಾದರಿ ಪ್ರಶ್ನೆಪತ್ರಿಕೆಗಳ ಮೇಲೆ ಹೆಚ್ಚು ಗಮನ ಹರಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಯಾವುದೇ ತಪ್ಪು ಮಾಹಿತಿ ಅಥವಾ ವದಂತಿಗಳಿಗೆ ಕಿವಿಗೊಡಬಾರದು. ಇದರಿಂದ ತಮ್ಮ ಅಧ್ಯಯನದ ಗಮನ ಕೆಡಿಸಿಕೊಳ್ಳಬಾರದು. ಪರೀಕ್ಷೆ ಬರೆಯುವಾಗ ಶಾಂತಚಿತ್ತದಿಂದ ಇರಬೇಕು, ಪ್ರತಿ ಪ್ರಶ್ನೆಯನ್ನು ಒಂದು ಬಾರಿ ಓದಿ, ಅರ್ಥವಾಗದಿದ್ದರೆ ಮತ್ತೊಮ್ಮೆ ಓದಿ ಸರಿಯಾಗಿ ಅರ್ಥಮಾಡಿಕೊಂಡು ಉತ್ತರ ಬರೆಯಬೇಕು. ಮಾದರಿ ಪ್ರಶ್ನೆಪತ್ರಿಕೆಗಳು ಮತ್ತು ಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆಗಳ ಆಧಾರದ ಮೇಲೆ ಸಿದ್ಧರಾಗಿರುವ ವಿದ್ಯಾರ್ಥಿಗಳಿಗೆ ಉತ್ತಮ ಅಂಕಗಳನ್ನು ಗಳಿಸುವ ಮತ್ತು ಸುಲಭವಾಗಿ ಪಾಸಾಗುವ ಹೆಚ್ಚಿನ ಅವಕಾಶಗಳಿವೆ ಎಂದು ಇಲಾಖೆ ತಿಳಿಸಿದೆ.
ಶುಭ ಹಾರೈಸಿದ ಸಿಎಂ, ವಿಪಕ್ಷ ನಾಯಕ
ಇನ್ನು ನಾಳೆಯಿಂದ ಎಸ್ಎಸ್ಎಲ್ಸಿ ಪರೀಕ್ಷೆ ಹಿನ್ನೆಲೆ ಎಕ್ಸಾಂ ಬರೆಯಲಿರುವ ವಿದ್ಯಾರ್ಥಿಗಳಿಗೆ ವಿಧಾನಸಭೆಯಲ್ಲಿ ಶುಭ ಹಾರೈಸಲಾಗಿದೆ. ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕ ಅಶೋಕ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಲ್ ದಿ ಬೆಸ್ಟ್ ಹೇಳಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.