ಬೆಂಗಳೂರು, ಮೇ 07: ಸ್ಪರ್ಧಿಸಿದ ಮೊದಲ ಚುನಾವಣೆಯಲ್ಲಿಯೇ ನಟ ದಳಪತಿ ವಿಜಯ್ ನೇತೃತ್ವದ ‘ತಮಿಳುಗ ವೆಟ್ರಿ ಕಳಗಂ’ (TVK) ಪಕ್ಷ ತಮಿಳುನಾಡಲ್ಲಿ ಭರ್ಜರಿ ಯಶಸ್ಸು ಕಂಡಿದೆ. ರಾಜ್ಯದ ದೊಡ್ಡ ಪಕ್ಷವಾಗಿ ಟಿವಿಕೆ ಹೊರಹೊಮ್ಮಿದ್ದರೂ ಕೂಡ ಸರ್ಕಾರ ರಚನೆಗೆ ಬಹುಮತದ ಸಮಸ್ಯೆ ಕಾಡತೊಡಗಿದೆ. ಇಂದು (ಮೇ 7) ಬೆಳಿಗ್ಗೆ ವಿಜಯ್ ಅವರನ್ನು ರಾಜಭವನಕ್ಕೆ ಕರೆಸಿಕೊಂಡ ರಾಜ್ಯಪಾಲ ಆರ್ವಿ ಅರ್ಲೇಕರ್, ಮೊದಲು 118 ಶಾಸಕರ ಬೆಂಬಲವಿರುವ ಅಧಿಕೃತ ಪತ್ರ ತನ್ನಿ ಎಂದು ಕಠಿಣ ಷರತ್ತು ವಿಧಿಸಿದ್ದಾರೆ. ಎರಡು ದಿನಗಳಲ್ಲಿ ರಾಜ್ಯಪಾಲರನ್ನು ವಿಜಯ್ ಎರಡನೇ ಬಾರಿ ಭೇಟಿಯಾಗಿದ್ದು, ಸಂವಿಧಾನದ ಚೌಕಟ್ಟಿನೊಳಗೆ ಹಲವು ಪ್ರಶ್ನೆಗಳನ್ನ ಎದುರಿಸಿದ್ದಾರೆ. ಕೇವಲ 113 ಶಾಸಕರನ್ನು (ಟಿವಿಕೆ 108 + ಕಾಂಗ್ರೆಸ್ 5) ಇಟ್ಟುಕೊಂಡು ಸರ್ಕಾರ ಹೇಗೆ ನಡೆಸುತ್ತೀರಿ? ಎಂಬ ಪ್ರಶ್ನೆಯೂ ಬಂದಿದೆಯಂತೆ. ಹೀಗಿದ್ದರೂ ಸಿಪಿಐ, ಸಿಪಿಐ(ಎಂ), ವಿಸಿಕೆ ಮತ್ತು ಪಿಎಂಕೆ ಪಕ್ಷಗಳ ಬೆಂಬಲದೊಂದಿಗೆ ನಮ್ಮ ಸಂಖ್ಯಾಬಲ 123 ಕ್ಕೆ ಏರಲಿದೆ. ಬಹುಮತ ಸಾಬೀತುಪಡಿಸಲು ನಾನು ಸಿದ್ಧ ಎಂದು ವಿಜಯ್ ಹೇಳಿದ್ದಾರೆ. ಆದರೆ ಬಾಯಿಮಾತಿನ ಭರವಸೆಗೆ ರಾಜ್ಯಪಾಲರು ಒಪ್ಪುತ್ತಿಲ್ಲ ಎನ್ನಲಾಗಿದೆ.
ಸಚಿವನಾಗಿ ನಿತೀಶ್ ಕುಮಾರ್ ಪುತ್ರ ನಿಶಾಂತ್ ಪ್ರಮಾಣ
ಬಿಹಾರ ರಾಜ್ಯ ರಾಜಕಾರಣದಲ್ಲಿ ಹೊಸ ಶಕೆ ಆರಂಭವಾಗಿದ್ದು, ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಪುತ್ರ ನಿಶಾಂತ್ ಕುಮಾರ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಸಾಮ್ರಾಟ್ ಚೌಧರಿ ನೇತೃತ್ವದ ಎನ್ಡಿಎ ಸರ್ಕಾರವು ತನ್ನ ಸಚಿವ ಸಂಪುಟವನ್ನು ವಿಸ್ತರಿಸಿದೆ. ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸೈಯದ್ ಅತಾ ಹಸ್ನೈನ್ ಅವರು ನಿಶಾಂತ್ ಕುಮಾರ್ ಸೇರಿದಂತೆ ಒಟ್ಟು 31 ನಾಯಕರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ನಿತೀಶ್ ಕುಮಾರ್ ಸಾಕ್ಷಿಯಾಗಿದ್ದಾರೆ. ಎನ್ಡಿಎ ಮೈತ್ರಿಕೂಟದ ಪ್ರಮುಖ ನಾಯಕರೆಲ್ಲರೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಮುಂಬರುವ ಚುನಾವಣೆಗೆ ತಮ್ಮ ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ ಎಂಬ ಮಾತುಗಳೂ ಕೇಳಿಬಂದಿವೆ.
ಇದನ್ನೂ ಓದಿ: ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆ, ಆಪರೇಷನ್ ಸಿಂಧೂರ್ಗೆ ಒಂದು ವರ್ಷ!
ಕೇರಳಕ್ಕೆ ಯಾರಾಗ್ತಾರೆ ಕಿಂಗ್?
ಕೇರಳದಲ್ಲಿ ಹೊಸ ಸರ್ಕಾರ ರಚನೆ ಪ್ರಕ್ರಿಯೆಗಳು ಚುರುಕುಗೊಂಡಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ತೀವ್ರ ಪೈಪೋಟಿ ಉಂಟಾಗಿದೆ. ಕಾಂಗ್ರೆಸ್ನ ಪ್ರಮುಖ ನಾಯಕರಾದ ಕೆ.ಸಿ. ವೇಣುಗೋಪಾಲ್, ವಿ.ಡಿ. ಸತೀಶನ್ ಮತ್ತು ರಮೇಶ್ ಚೆನ್ನಿತಲ ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ಮೂವರ ನಡುವೆ ಸ್ಪರ್ಧೆ ಹಿನ್ನೆಲೆ ಹೈಕಮಾಂಡ್ ಶಾಸಕರ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದೆ. ಈ ಪ್ರಕ್ರಿಯೆಗಾಗಿ ಎಐಸಿಸಿ ವೀಕ್ಷಕರಾದ ಮುಕುಲ್ ವಾಸನಿಕ್ ಮತ್ತು ಅಜಯ್ ಮಾಕೇನ್ ಅವರು ಕೇರಳದ ತಿರುವನಂತಪುರಂನ ಕೆಪಿಸಿಸಿ ಕಚೇರಿಗೆ ಆಗಮಿಸಿದ್ದಾರೆ. 63 ಕಾಂಗ್ರೆಸ್ ಶಾಸಕರಿಂದ ಪ್ರತ್ಯೇಕವಾಗಿ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಆರಂಭಿಕ ಮಾಹಿತಿಗಳ ಪ್ರಕಾರ, ಕೆ.ಸಿ. ವೇಣುಗೋಪಾಲ್ ಅವರಿಗೆ 47 ಶಾಸಕರ, ವಿ.ಡಿ. ಸತೀಶನ್ ಅವರಿಗೆ 35 ಶಾಸಕರ ಮತ್ತು ರಮೇಶ್ ಚೆನ್ನಿತಲ ಅವರಿಗೆ 16 ಶಾಸಕರ ಬೆಂಬಲವಿದೆ ಎಂದು ತಿಳಿದುಬಂದಿದೆ. ಈ ವರದಿಗಳನ್ನು ಆಧರಿಸಿ ಹೈಕಮಾಂಡ್ ಅಂತಿಮ ನಿರ್ಧಾರ ಪ್ರಕಟಿಸಲಿದೆ. ಮೇ 10ರೊಳಗೆ ಕೇರಳದಲ್ಲಿ ಹೊಸ ಕಾಂಗ್ರೆಸ್ ಮುಖ್ಯಮಂತ್ರಿ ಅಧಿಕಾರ ಸ್ವೀಕಾರ ಮಾಡುವ ನಿರೀಕ್ಷೆಯಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
