ಮೈಸೂರು: ಆಷಾಢ ಮಾಸದ ಕೊನೆಯ ಶುಕ್ರವಾರ ನಾಡ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಹಬ್ಬದ ವಾತಾವರಣ ನೆಲೆಸಿದೆ. ಈ ವಿಶೇಷ ದಿನದಂದು ಚಾಮುಂಡೇಶ್ವರಿಯ ಉತ್ಸವ ಮೂರ್ತಿಯನ್ನು ಮಹಾಲಕ್ಷ್ಮಿ ಅಲಂಕಾರದಲ್ಲಿ ಸುಂದರವಾಗಿ ಅಲಂಕರಿಸಲಾಗಿದೆ. ವಿವಿಧ ಪುಷ್ಪಗಳಿಂದ ಮಂಟಪವನ್ನು ಶೃಂಗರಿಸಲಾಗಿದ್ದು, ವಿಶೇಷವಾಗಿ ಶೇಷನಾಗದ ಆಕಾರದ ಮೊಗ್ಗಿನ ಜೊಡೆ ಅಲಂಕಾರ ಭಕ್ತರ ಗಮನ ಸೆಳೆದಿದೆ.
ಬೆಳಗಿನ ಜಾವ 3:30ರಿಂದಲೇ ವಿಶೇಷ ಅಭಿಷೇಕ, ಪೂಜೆ, ಮಂಗಳಾರತಿ ನೆರವೇರಿಸಲಾಯಿತು. ನಾಡಿಗೆ ಸುಭಿಕ್ಷೆ, ಶಾಂತಿ ನೆಲೆಸಲಿ ಹಾಗೂ ಉತ್ತಮ ಮಳೆ-ಬೆಳೆಯಾಗಲಿ ಎಂದು ಅರ್ಚಕರು ಪ್ರಾರ್ಥಿಸಿದರು. ಆಷಾಢ ಮಾಸದಲ್ಲಿ ಶಕ್ತಿ ದೇವತೆಗಳ ಆರಾಧನೆಗೆ ವಿಶೇಷ ಮಹತ್ವವಿದ್ದು, ಕುಟುಂಬ ಸಮೇತರಾಗಿ ಪೂಜಿಸಿದರೆ ಒಳಿತಾಗುತ್ತದೆ ಎಂಬ ನಂಬಿಕೆಯಿದೆ. ಕೊನೆಯ ಶುಕ್ರವಾರ ಭಕ್ತರ ಸಂಖ್ಯೆ ದುಪ್ಪಟ್ಟಾದ ಕಾರಣ, ಜಿಲ್ಲಾಡಳಿತ ಖಾಸಗಿ ವಾಹನಗಳಿಗೆ ನಿರ್ಬಂಧ ವಿಧಿಸಿ, ಉಚಿತ ಸರ್ಕಾರಿ ಬಸ್ ವ್ಯವಸ್ಥೆ ಮಾಡಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ಭಕ್ತಿಪೂರ್ವಕವಾಗಿ ದೇವಿಯ ದರ್ಶನ ಪಡೆಯುತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
